ರಾಮಾಯಣ ಸಮಾಜದ ಏಳಿಗೆಗೆ ದಾರಿದೀಪ: ಶ್ವೇತಾ ದೇವರಾಜ್

0

ರಾಮಾಯಣದಲ್ಲಿ ಬಿಂಬಿತವಾಗಿರುವ ಹಲವಾರು ಅಂಶಗಳು ಸಮಾಜದ ಏಳಿಗೆಗೆ ಸಾಕಷ್ಟು ಬೆಳಕನ್ನು ಚೆಲ್ಲುತ್ತವೆ. ಆದ್ದರಿಂದಲೇ ಮಹಾತ್ಮ ಗಾಂದೀಜಿಯವರು ಭಾರತವನ್ನು ರಾಮರಾಜ್ಯವನ್ನಾಗಿ ಕಾಣಬೇಕೆಂಬ ಮಹಾಭಿಲಾóಷೆಯನ್ನು ಹೊಂದಿದ್ದರು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿಯವರು ನಾರದರ ಮಾತಿಗೆ ಪ್ರೇರೇಪಿತರಾಗಿ ಸಾಂಸಾರಿಕ ಸಾಂಗತ್ಯವನು ತೊರೆದು, ತದೇಕಚಿತ್ತದಿಂದ ರಾಮ ಧ್ಯಾನವನ್ನು ಮಾಡಿ ಜ್ಞಾನವನ್ನು ಪಡೆದು ಇಂದಿಗೂ ಚಿರಸ್ಮರಣೀಯವಾಗಿರುವ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಅದೇ ರೀತಿ ಪ್ರತಿಯೊಬ್ಬರೂ ಸಹ ಸನ್ಮಾರ್ಗದಲ್ಲಿ ನಡೆದು ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಸಮಾಜಿಕ, ರಾಜಕೀಯ, ವೈಯುಕ್ತಿಕ ಜೀವನ ಹೀಗೆ ಹಲವಾರು ವಿಷಯಗಳ ಮೌಲ್ಯಗಳನ್ನು ಬಿಂಬಿಸುತ್ತದೆ. ಆದ್ದರಿಂದಲೇ ಈ ಕಾವ್ಯವು ಇಂದಿಗೂ ಪ್ರಸ್ತುತವಾಗಿರುವುದರ ಜೊತೆಗೆ ಸಮಾಜಕ್ಕೆ ಮಾದರಿಯಾಗಿ ಉಳಿದಿದೆ ಎಂದು ಅವರು ಹೇಳಿದರು.
ಒಬ್ಬ ವ್ಯಕ್ತಿಯು ಯಾವುದೇ ಹಿನ್ನೆಲೆ ಇದ್ದರೂ ಸಹ ಏಕಾಗ್ರತೆ ಹಾಗೂ ಶ್ರದ್ಧೆಯಿಂದ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಮಹರ್ಷಿ ವಾಲ್ಮೀಕಿಯವರು ಸಾಕ್ಷಿಯಾಗಿದ್ದಾರೆ. ರಾಮಾಯಣ ಕಾವ್ಯದಲ್ಲಿ ವಾಲ್ಮೀಕಿಯವರು ಚಿತ್ರಿಸಿರುವ ನಿದರ್ಶನಗಳು ಪ್ರತಿಯೊಬ್ಬ ಸಾಮಾನ್ಯ ವ್ಯಕ್ತಿಯ ಜೀವನಕ್ಕೆ ಹೋಲುತ್ತವೆ. ಆದ್ದರಿಂದ ಆ ಮಹಾಕಾವ್ಯದಲ್ಲಿ ವ್ಯಕ್ತವಾಗಿರುವ ಸತ್ಯ, ಧೈರ್ಯ, ಸಹನೆ, ಕ್ಷಮೆ ಹೀಗೆ ಹಲವು ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಸಮುದಾಯದ ಮುಖಂಡರಾದ ಜಯಶಂಕರ್ ಬೆಳಗುಂಬ ಅವರು ಮಾತನಾಡಿ ರಾಮಾಯಣವನ್ನು ರಚಿಸಿದ ವಾಲ್ಮೀಕಿಯವರ ಜೀವನ ಕುರಿತು ಅನೇಕ ರೀತಿಯ ಉಲ್ಲೇಖಗಳಿವೆ, ಆದರೆ ಅವರ ವಾಸ್ತವಿಕತೆಯನ್ನು ಅರಿಯಲು ಯಾರೂ ಸಹ ಪ್ರಯತ್ನಿಸುತ್ತಿಲ್ಲ ಎಂದರು.
ಸುಮಾರು 24,000 ಶ್ಲೋಕಗಳು ಹಾಗೂ 6 ಖಂಡಗಳನ್ನು ಒಳಗೊಂಡಿರುವ ರಾಮಾಯಣ ಮಹಾಕಾವ್ಯ ಪ್ರೀತಿ, ತ್ಯಾಗ, ಸಹನೆ, ಪ್ರಕೃತಿ ಸೌಂದರ್ಯ, ವಿರಹ ಹೀಗೆ ಹಲವಾರು ಅಂಶಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಎನ್ ನಂದಿನಿ, ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ ಶಿವಣ್ಣ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಈ. ಕೃಷ್ಣೇಗೌಡ, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಧರ್, ತಹಶೀಲ್ದಾರ್ ಶಿವಶಂಕರಪ್ಪ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸರದಾರ್ ವಲ್ಲಬಾಯಿ ಪಟೇಲ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

LEAVE A REPLY

Please enter your comment!
Please enter your name here