ಹಾಸನಾಂಬ ದೇವಾಲಯಕ್ಕೆ ಜಿಲ್ಲಾಧಿಕಾರಿ ಭೇಟಿ

1

ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಇಂದು ಹಾಸನಾಂಬ ಹಾಗೂ ಸಿದ್ದೇಶ್ವರ ದೇವಾಲಯದ ಆವರಣಕ್ಕೆ ಭೇಟಿ ನೀಡಿ ಈಬಾರಿಯ ದರ್ಶನೋತ್ಸವದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ನಗರದ ಅದಿದೇವತೆ ಹಾಸನಾಂಬ ದೇವಾಲಯಕ್ಕೆ ಇಂದು ಭೇಟಿ ನೀಡಿದ ಅವರು ದರ್ಶನೋತ್ಸವದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕೊರೋನಾ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ದೇವಸ್ಥಾನದ ಒಳಗಡೆ ದೇವಿಯ ದರ್ಶನ ಮಾಡಲು ಅನುಮತಿ ಇಲ್ಲದ ಕಾರಣ ಎಲ್.ಇ.ಡಿ ಸ್ಕ್ರೀನ್‍ಗಳನ್ನು ದೇವಸ್ಥಾನದ ಆವರಣ ಹಾಗೂ ನಗರದ ಇತರೆ ಭಾಗಗಳಲ್ಲಿ ಅಳವಡಿಸಲಾಗುತ್ತಿದ್ದು, ಅದಕ್ಕೆ ಆಯ್ಕೆ ಮಾಡಿರುವ ಸ್ಥಳಗಳನ್ನು ಪರಿಶೀಲಿಸಿದರು.
ಸಾರ್ವಜನಿಕರು ದೇವಾಲಯದ ಹೊರ ಆವರಣಕ್ಕೆ ಬಂದರೆ ಜನಸಂದಣಿಯಾದಂತೆ ಬ್ಯಾರಿಕೇಡ್‍ಗಳನ್ನು ಕ್ರಮಬದ್ಧವಾಗಿ ಅಳವಡಿಸುವಂತೆ ಅವರು ಸೂಚಿಸಿದರಲ್ಲದೆ, ದೇವಸ್ಥಾನದ ಸುತ್ತಮುತ್ತ ಇರುವ ರಸ್ತೆಗಳಲ್ಲಿ ಕೆಲವನ್ನು ಏಕ ಮುಖ ಸಂಚಾರ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ತಿಳಿಸಿದರು.

ಒಟ್ಟಾರೆಯಾಗಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಎಲ್ಲವನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು, ಲೈಟ್ ಸ್ಕ್ರೀನಿಂಗ್ ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಎಂದು ಅವರು ಹೇಳಿದರು.
ಇದೇವೇಳೆ ದೇವಸ್ಥಾನದ ಸುತ್ತಲಿನ ರಸ್ತೆ ವ್ಯವಸ್ಥೆ ಹಾಗೂ ಸಂತೇಪೇಟೆ ವೃತ್ತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿಯವರು ವೀಕ್ಷಿಸಿ ನಗರಸಭೆ, ಲೋಕೋಪಯೋಗಿ ಹಾಗೂ ರಾಜ್ಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ನಗರಸಭೆ ಆಯುಕ್ತರಾದ ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಾದ ಸಂಜಯ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕಕ ಅಭಿಯಂತರರಾದ ಎನ್.ಟಿ ಸುರೇಶ್ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

1 COMMENT

LEAVE A REPLY

Please enter your comment!
Please enter your name here